HOMENews

ರಸ್ತೆ ಮತ್ತು ಬಾಕ್ಸ್ ಡ್ರೈನ್ ಕಾಮಗಾರಿಗೆ ಕೃಷ್ಣರಾಜ  ಶಾಸಕ ಟಿ.ಎಸ್. ಶ್ರೀವತ್ಸರವರಿಂದ ಗುದ್ದಲಿಪೂಜೆ

ಮೈಸೂರು: ನಗರದ ಕೆ.ಆರ್ ಕ್ಷೇತ್ರದ ವಾರ್ಡ್ ನಂಬರ್ 59ರಲ್ಲಿ ರಸ್ತೆ ಹಾಗೂ ಬಾಕ್ಸ್ ಡ್ರೈನ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಅವರು ಇಂದು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಶ್ರೀರಾಂಪುರ ಎಲ್‌ಐಜಿ ಮನೆಗಳ ಮುಂಭಾಗ ಹಾಗೂ 807 ಹುಡ್ಕೋ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಸುಮಾರು 72 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಯಡಿ ಹೊಸ ರಸ್ತೆ ನಿರ್ಮಾಣ ಹಾಗೂ ಬಾಕ್ಸ್ ಡ್ರೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಭಾಗದಲ್ಲಿ ಮಳೆಯ ಸಮಯದಲ್ಲಿ ನೀರು ನಿಂತು ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಬೇಡಿಕೆಗೆ ಸ್ಪಂದಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.

ಈ ಕಾಮಗಾರಿಗಳು ಪೂರ್ಣಗೊಂಡ ನಂತರ ಮಳೆಯ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಆಗುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಉತ್ತಮ ರಸ್ತೆ ನಿರ್ಮಾಣದಿಂದ ವಾಹನ ಸಂಚಾರ ಸುಗಮವಾಗಲಿದ್ದು, ಸ್ಥಳೀಯ ನಿವಾಸಿಗಳ ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರಾಜೇಶ್ ಜಾದವ್, ಹೇಮಂತ್ ಕುಮಾರ್, ಮಂಜುನಾಥ್, ಪ್ರಸನ್ನ, ಸಚಿನ್, ರೂಪ ಹಾಗೂ ಮಂಜುಳಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಗರ ಪಾಲಿಕೆ ಅಧಿಕಾರಿಗಳಾದ ಚೇತನ್ ಬಾಬು, ಇಂಜಿನಿಯರ್ ಶಿವಮೂರ್ತಿ ಸೇರಿದಂತೆ ಸ್ಥಳೀಯ ನಿವಾಸಿಗಳು ಭಾಗವಹಿಸಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ಸ್ಥಳೀಯರು ಮಾತನಾಡಿ, ಈ ಭಾಗದಲ್ಲಿ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆ ಸರಿಯಾಗಿರದ ಕಾರಣ ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದೇವೆ. ಈಗ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸದ ವಿಷಯವಾಗಿದ್ದು, ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ಶೀಘ್ರ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

Leave a Reply