
ನಮ್ಮ ನಡೆ ಸ್ವಚ್ಛತೆ ಕಡೆ- ರನ್ ಫಾರ್ ಮಂಡ್ಯ -ಮ್ಯಾರಥಾನ್
ಮಂಡ್ಯ ಮಾ. 8:- ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣ ವಾಗಿ ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಮಂಡ್ಯ ಅಭಿವೃದ್ಧಿಗೆ ಕೈಜೊಡಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ತಿಳಿಸಿದರು.

ಅವರು ಇಂದು ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡೆ ಸ್ವಚ್ಛತೆ ಕಡೆ- ರನ್ ಫಾರ್ ಮಂಡ್ಯ -ಮ್ಯಾರಥಾನ್” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಮಂಡ್ಯ ವಿಧಾನ ಸಭಾ ಶಾಸಕರಾದ ಪಿ. ರವಿಕುಮಾರ್ ಅವರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಶಾಸಕರಾದ ಪಿ. ರವಿಕುಮಾರ್ ಮುಂದಾಳತ್ವದಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಸೇರಿ ಯಶಸ್ವಿಯಾಗಿ ಕಾರ್ಯಕ್ರಮ ಮಾಡಲಾಯಿತು. ಅಂದು ಕೂಡ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಂಡಿದ್ದವು ಎಂದು ಅವರು ತಿಳಿಸಿದರು.

ಮಂಡ್ಯ ಶಾಸಕರಾದ ಪಿ. ರವಿ ಕುಮಾರ್ ಅವರು ಉತ್ತಮ ರಸ್ತೆ ನಿರ್ಮಾಣ ಮಾಡಿದ್ದಾರೆ. ವಿಶ್ವದರ್ಜೆಯ ಸರ್ಕಲ್ ಮಾಡಲು ಕೈಹಾಕಿದ್ದಾರೆ. ಅವರಿಗೆ ಜನತೆಯ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ ಅವರು ರನ್ ಫಾರ್ ಮಂಡ್ಯ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಸಾನಿಧ್ಯ ವಹಿಸಿ ಮಾತನಾಡಿ 2047 ನೇ ಇಸವಿಗೆ ನಮ್ಮ ದೇಶಕ್ಕೆ ಸ್ವತಂತ್ರ ಬಂದು 100 ವರ್ಷ ಪೂರ್ಣಗೊಳ್ಳುತ್ತದೆ. ಆದ್ದರಿಂದ ನಮ್ಮ ದೇಶದ ನಂ 1 ದೇಶವನ್ನಾಗಿ ಮಾಡವ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ದೇಶದ ಅಭಿವೃದ್ಧಿ ಕೆಲಸಗಳು ಆಗಬೇಕು ಕನಸು ನನಸಾಗಬೇಕು ಎಂದು ಹೇಳಿದರು.

ಮಕ್ಕಳು ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು ಮತ್ತು ಜಿಲ್ಲೆಯನ್ನು ಸ್ವಚ್ಛತೆಯಿಂದ ಶುದ್ಧವಾಗಿ ನೋಡಿಕೊಳ್ಳುವ ಕಾರ್ಯ ಮಾಡಬೇಕು. ನಮ್ಮ ನಡೆ ಸ್ವಚ್ಛತೆ ಕಡೆ ರನ್ ಫಾರ್ ಮಂಡ್ಯ ಮ್ಯಾರಥಾನ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು
ಸಂಗೀತ ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸಾಧು ಕೋಕಿಲ ರವರು ಮಾತನಾಡಿ ಪರಿಸರ ನೈರ್ಮಲ್ಯ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಕಸ ವಿಲೇವಾರಿ, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ, ಮನೆ ಮತ್ತು ಶಾಲಾ/ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಮುಖ್ಯವಾಗಿದೆ. ಪ್ರತಿಯೊಬ್ಬರು ಮೊದಲು ಮನೆಯಿಂದಲೇ ಸ್ವಚ್ಛತೆ ಕಾರ್ಯವನ್ನು ಮಾಡಬೇಕು, ಮನೆಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ನೋಡಿಕೊಳ್ಳುವುದರಿಂದ ಜಿಲ್ಲೆಯನ್ನು ಸ್ವಚ್ಛತೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಚಲನ ಚಿತ್ರ ನಟ ವಿರಾಟ್ ಮಾತನಾಡಿ ಸ್ವಚ್ಛತೆ ಆರೋಗ್ಯದ ಮೂಲ. ಮನೆ ಸುತ್ತಮುತ್ತಲಿನ ಪರಿಸರ, ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಸಾಂಕ್ರಾಮಿಕ ರೋಗಗಳನ್ನು ತಡೆಯಲು ಅತ್ಯಗತ್ಯ. ಸ್ವಚ್ಛ ಭಾರತ್ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಸುಂದರ ಪರಿಸರವನ್ನು ನಿರ್ಮಿಸೋಣ ಎಂದು ತಿಳಿಸಿದರು. ಚಲನ ಚಿತ್ರ ನಟಿ ರಾಧಿಕಾ ನಾರಾಯಣ್ ರವರು ಮಾತನಾಡಿ ಮನೆಯಿಂದ ಸ್ವಚ್ಛತೆಯನ್ನು ಮಾಡಬೇಕು. ಪರಿಸರ ನೈರ್ಮಲ್ಯ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನ ಸಭಾ ಶಾಸಕರಾದ ಪಿ. ರವಿಕುಮಾರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಪಿ. ಪ್ರಕಾಶ್, ಜಿಲ್ಲಾಧಿಕಾರಿಗಳು ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಶೋಭಾ ರಾಣಿ, ನಗರಾಭಿವೃದ್ಧಿ ಕೋಶ ಯೋಜನಾ ಅಧಿಕಾರಿ ಟಿ. ಎನ್. ನರಸಿಂಹ ಮೂರ್ತಿ, ನಗರ ಸಭೆಆಯುಕ್ತರು ಪಂಪಶ್ರೀ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.





