ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಅಡಿಯಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ – ಜಿ. ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಮಾ.04:- ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಯಡಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಸೂಚನೆ ನೀಡಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಾಗೂ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅನುಷ್ಠಾನ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜನಾಂಗದ ಕುಂದು ಕೊರತೆ ಸಭೆ 3 ತಿಂಗಳಿಗೊಮ್ಮೆ ನಡೆಸಲಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟಿರುವ ನಿವೇಶನಗಳನ್ನು ಅರ್ಹ ಪಲಾನುಭವಿಗಳಿಗೆ ನೀಡದೆ ಬೇರೆ ಪಲಾನುಭವಿಗೆ ನೀಡಲಾಗುತ್ತಿದೆ ಎಂಬ ದೂರುಗಳು ಬಂದಿದ್ದು, ಈ ಬಗ್ಗೆ ಪರಿಶೀಲನೆ ಮಾಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜನಾಂಗದ ಜನರು ವಾಸವಿಲ್ಲದ ಕಡೆ ಅವರಿಗೆ ಮೀಸಲಿರುವ ಅನುದಾನ ಬಳಕೆ ಮಾಡಿ ರಸ್ತೆ ನಿರ್ಮಾಣ ಚರಂಡಿ ನಿರ್ಮಾಣ ಮಾಡುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ತನಿಖೆ ಮಾಡಲಾಗುವುದು. ಸರ್ಕಾರದಿಂದ ನೀಡಲಾಗುವ ನಿರ್ದೇಶನದಂತೆ ಅಭಿವೃದ್ದಿ ಕಾರ್ಯಕ್ರಮವನ್ನು ಮುಂದುವರೆಸಬೇಕು. ನಗರ ಸಭೆ ಅಥವಾ ಗ್ರಾಮ ಪಂಚಾಯತ್ ಅಲ್ಲಿ ಸದಸ್ಯರು ನೀಡಲಾಗುವ ಪಟ್ಟಿ ಅನುಸಾರ ಕಾಮಗಾರಿ ಪಟ್ಟಿ ಮಾಡಿ ಅನುಮೋದನೆ ನೀಡಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜನಾಂಗದವರು ಹೆಚ್ಚಾಗಿ ವಾಸವಿರುವ ಪ್ರದೇಶಗಳಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳು ಸಮರ್ಪಕವಾಗಿ ಅಗಿವೆಯೇ ಎಂಬುದನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳು ಹಾಗೂ ಜಂಟಿ ನಿರ್ದೇಶಕರು ಪರಿಶೀಲನೆ ಮಾಡಿ ದೃಢೀಕರಣ ನೀಡಬೇಕು ಎಂದು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ. ರಂಗೇಗೌಡ ಅವರು ಮಾತನಾಡಿ ಭಾರತೀಯ ಸಮಾಜ ಶ್ರೇಣಿ ಕೃತ ಸಮಾಜವಾಗಿರುವುದರಿಂದ ಇಲ್ಲಿ ಮೇಲು ಕೀಳು ಎಂಬ ಜಾತಿ ವ್ಯವಸ್ಥೆಯನ್ನು ಹುಟ್ಟಿಕೊಂಡಿದೆ. ಆದ್ದರಿಂದ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡವನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಹಲವಾರು ಕಾಯ್ದೆ ನಿಯಮಗಳನ್ನು ಜಾರಿಗೆ ತಂದಿದೆ.
ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಹಣವನ್ನು ದುರುಪಯೋಗ ಮಾಡಿದರೆ ಅದಕ್ಕೆ ಶಿಕ್ಷೆ ಇದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಅಭಿವೃದ್ದಿಗೆ ಮಾತ್ರ ಈ ಅನುದಾನವನ್ನು ಬಳಕೆ ಮಾಡಬೇಕು. ಬಡತನದಿಂದ ಕೂಡಿರುವ ಈ ಜನಾಂಗ ಸಾಮಾಜಿಕವಾಗಿ ಆರ್ಥಿಕವಾಗಿ ಶಿಕ್ಷಣಿಕವಾಗಿ ಮೇಲೆ ಬರಲು ಅನುದಾನವನ್ನು ಖರ್ಚು ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯುತ್ ಮೂಮೆಂಟ್ ನ ಯೋಜನಾ ನಿರ್ದೇಶಕರಾದ ಕೆ.ಆರ್ ಶಂಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.





