
ಮೈಸೂರು, ಮಾ.13:- ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥಚಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ತಿಳಿಸಿದರು.
ಅವರು ಇಂದು ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ಚರಿ ಸಭಾಂಗಣದಲ್ಲಿ ಜನ ಸುನ್ವಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳೆಯರು ಯಾವುದೇ ರೀತಿಯ ತೊಂದರೆ ಉಂಟಾದರು ನಿರ್ಭಯವಾಗಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸುವಂತಾಗಬೇಕು ಎಂದರು.

ಕಟ್ಟಕಡೆಯ ಮಹಿಳೆಗೂ ನ್ಯಾಯ ಒದಗಿಸುವುದು ಆಯೋಗದ ಉದ್ದೇಶವಾಗಿದೆ. ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಇಲಾಖೆ ವತಿಯಿಂದ ನಡೆಸಲಾಗುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.
ಮಹಿಳೆಯರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಸೌಜನ್ಯದಿಂದ ವರ್ತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ. ಮಹಿಳೆಯರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಅನುಚಿತ ವರ್ತನೆ ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ತಪ್ಪದೇ ದೂರು ಸಲ್ಲಿಸಿ ಎಂದರು.

ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪಾಷ್ (posch) ಸಮಿತಿ ಇದೆ. ಸಮಿತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು.ಇದರ ಅನುಷ್ಢಾನ ಕುರಿತು ಪರಿಶೀಲನೆ ನಡೆಸುವಂತೆ ತಿಳಿಸಿದರು.
ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಣ್ಣು ಮಕ್ಕಳು ಯಾವುದಾದರೂ ಶೋಷಣೆಗೆ ಒಳಗಾದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಂದರು.

ಹೆಣ್ಣು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ ಎಂಬ ಪೊಲೀಸ್ ಇಲಾಖೆ ವಾಹನವು ಮುಖ್ಯವಾಗಿ ಕಾಲೇಜುಗಳು, ತೊಂದರೆ ಇರುವ ಸ್ಥಳಗಳಲ್ಲಿ ಹೆಚ್ಚು ಗಸ್ತು ಮಾಡಲಾಗುತ್ತದೆ. ಮೈಸೂರು ನಗರದಲ್ಲಿಮಾದಕ ವಸ್ತುಗಳ ಸೇವನೆ ಹಾಗೂ ಸಾಗಣಿಕೆಯನ್ನು ತಡೆಗಟ್ಟಲು ವಿಮುಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
2023 ನೇ ಸಾಲಿನಿಂದ ಗಮನಿಸಿದರೆ ಮೈಸೂರು ನಗರ ವ್ಯಾಪ್ತಿಯಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು ಅವರು ಸಭೆಗೆ ಬಹಳಷ್ಟು ಮಹಿಳೆಯರು ನಿವೇಶನ, ಮೂಲಭೂತ ಸೌಕರ್ಯಗಳ ಬಗ್ಗೆ ಮನವಿ ಸಲ್ಲಿಸಿದವರಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಹಿಳೆಯೊಬ್ಬರು ತಮಗೆ ಖಾಸಗಿ ಸಂಸ್ಥೆಯಿಂದ ಇರಲು ಮನೆ ಸೇರಿದಂತೆ ಮೂಲಸೌಲಭ್ಯಗಳ ತೊಂದರೆಯಾಗುತ್ತಿರುವ ಬಗ್ಗೆ ತಿಳಿಸಿದಾಗ ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು ಅವರು ಸ್ಪಂದಿಸಿ ಪೂರ್ಣ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡುವಂತೆ ತಿಳಿಸಿದರು.
ಎ.ಸಿ.ಪಿ ಗಂಗಾಧರ್ ಸ್ವಾಮಿ ಅವರು ಮಾತನಾಡಿ ಪ್ರತಿ ಮಾಹೆ ಜನಸಂಪರ್ಕ ಸಭೆ, ಪ್ರತಿ ಮಾಹೆಯ ಕೊನೆಯ ಭಾನುವಾರ ಶೋಷಣೆಗೆ ಒಳಗಾದವರ ದಿನ, ಮನೆ ಮನೆ ಪೊಲೀಸ್ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಮಾನವ ಕಳ್ಳಸಾಗಣೆ ತಡೆಗಟ್ಟಲು ಪ್ರತ್ಯೇಕ ಪೊಲೀಸ್ ತಂಡ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ಗುರುವಾರ ಈ ತಂಡದಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ತೆರೆದ ಮನೆ ಎಂಬ ಕಾರ್ಯಕ್ರಮ ನಡೆಸಲಾಗುತ್ತದೆ. ಇದರೊಂದಿಗೆ ಎರಡು ತಿಂಗಳಿಗೊಮ್ಮೆ ವಿವಿಧ ಇಲಾಖೆ ಹಾಗೂ ಎನ್.ಜಿ. ಒ ಸಂಸ್ಥೆಯೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.
ಸಭೆಯಲ್ಲಿ ಎ.ಎಸ್.ಪಿ ನಾಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು





